ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಚುನಾವಣಾ ಬಾಂಡ್‌ ಗಳ ಮೂಲಕ ಕೋಟ್ಯಾಂತರ ರೂ. ಸುಲಿಗೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಇನ್ನಿತರ ಹಲವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ.

ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿದೆ ಎಂದು ಜನಾಧಿಕಾರಿ ಸಂಘರ್ಷ ಪರಿಷತ್ ನ ಆದರ್ಶ ಆರ್. ಐಯ್ಯರ್ ಎಂಬುವವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

ಹೀಗಾಗಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ ಮತ್ತು ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಅ. 10ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಿಲಕ್‌ ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

2019 ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರೂ. ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ. ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂಬುವುದು ದೂರಿನಲ್ಲಿ ಉಲ್ಲೇಖವಾಗಿದೆ.

ಈ ಸುದ್ದಿ ಹಂಚಿಕೊಳ್ಳಿ