ಶಿರೂರು ಗುಡ್ಡ ಕುಸಿತ ಪ್ರಕರಣ; 8ನೇ ಮೃತದೇಹ ಪತ್ತೆ

ಕಾರವಾರ: ಅಂಕೋಲದ ಶಿರೂರಿನಲ್ಲಿ ಭೂಕುಸಿತ ಉಂಟಾದ ಪರಿಣಾಮ ಹಲವಾರು ಬಲಿಯಾಗಿದ್ದರು. ಹೀಗಾಗಿ ಕಳೆದ ಒಂದು ವಾರದಿಂದ ಮಣ್ಣಲ್ಲಿ ಹುದುಗಿರುವ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ 8 ಮೃತದೇಹ ಹೊರ ತೆಗೆಯಲಾಗಿದೆ.

ಮೃತರಾದ 11 ಜನರಲ್ಲಿ ಇಲ್ಲಿಯವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಮೂವರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಒಂದೆಡೆ ಇನ್ನೂ ಈ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಆದರೂ ರಕ್ಷಣಾ ತಂಡ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆಸಿದೆ.

ಸಣ್ಣಿ ಹನುಮಂತ ಗೌಡ (67) ಎಂಬ ಮಹಿಳೆಯ ಶವ ಸಿಕ್ಕಿದೆ. ನಈ ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿದರೂ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.

ಈ ಭಾಗದ ಮಣ್ಣನ್ನು ಪರೀಕ್ಷೆ ಮಾಡಿದ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳ ತಂಡ ಮತ್ತೆ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆಯ ವರದಿ ನೀಡಿದೆ. ಹೀಗಾಗಿ ಕಾರ್ಯಾಚರಣೆ ಮಾಡುವುದು ಸಹ ದೊಡ್ಡ ತೊಡಕಾಗಿದ್ದು, ಸಾರ್ವಜನಿಕರಿಗೆ ಮಣ್ಣು ತೆರವಾದ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ.

ಜುಲೈ 16ರಂದು ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಯಿತು. ಈ ದುರಂತದಲ್ಲಿ 11 ಜನ ಬಲಿಯಾಗಿದ್ದಾರೆ. ಈ ಪೈಕಿ 8 ಜನರ ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ಸುದ್ದಿ ಹಂಚಿಕೊಳ್ಳಿ